ಮನುಷ್ಯ ಉಳಿಯಬೇಕಾದರೆ ಸಸ್ಯಾಹಾರದತ್ತ ತಿರುಗಬೇಕು…

This post was written by admin on December 31, 2008
Posted Under: Uncategorized

ಈಗ ಓದುತ್ತಿರುವ ಗಾಂಧಿಯ ಪುಸ್ತಕದಲ್ಲಿ ಸಸ್ಯಾಹಾರದ ಬಗ್ಗೆ ಗಾಂಧಿ ಮಾಡಿದ ಕೆಲವು ಪ್ರಯೋಗಗಳು ಮತ್ತು ಅವರು ಲಂಡನ್ನಿನಲ್ಲಿ ಓದುತ್ತಿರುವಾಗ ಸಸ್ಯಾಹಾರಿ ರೆಸ್ಟಾರೆಂಟ್‌ಗಳನ್ನು ಹುಡುಕಿಕೊಂಡು ಮೈಲುಗಟ್ಟಲೆ ನಡೆದೇ ಹೋಗುತ್ತಿದ್ದ ಚಿತ್ರಣವಿದೆ. ದೊಡ್ಡವನಾದ ಮೇಲೆ ಚೆನ್ನಾಗಿ ಮಾಂಸ ತಿನ್ನಬೇಕು; ಮಾಂಸ ತಿಂದು ಗಟ್ಟಿಯಾದರಷ್ಟೆ ಬ್ರಿಟಿಷರನ್ನು ದೇಶದಿಂದ ಹೊರಗಟ್ಟಲು ಸಾಧ್ಯ, ಎನ್ನುವ ಕಲ್ಪನೆಯೊಂದು ಗಾಂಧಿಯ ತಲೆ ಹೊಕ್ಕಿತ್ತು (ಹೇಳಬೇಕೆಂದರೆ, ಹೊಕ್ಕಿಸಲ್ಪಟ್ಟಿತ್ತು, ಅವರ ಬಾಲ್ಯ ಸ್ನೇಹಿತನೊಬ್ಬನಿಂದ). ಆದರೆ ತನ್ನ ತಾಯಿಗೆ (ಒತ್ತಾಯಪೂರ್ವಕವಾಗಿ) ಕೊಟ್ಟಿದ್ದ ವಚನದಿಂದಾಗಿ ಲಂಡನ್ನಿನಲ್ಲಿ ಸಸ್ಯಾಹಾರಿಯಾಗಿಯೇ ಕಾಲತಳ್ಳಬೇಕಿದ್ದ ಅಗತ್ಯ ಅಥವ ದರ್ದು ಗಾಂಧಿಗಿತ್ತು. ಆದರೆ ಗಾಂಧಿಯ ಮನಸ್ಸು ಅಲ್ಲಿ ವೈಚಾರಿಕ ಕಾರಣಗಳಿಗಾಗಿ ಬದಲಾಯಿತು. ಅಲ್ಲಿಯ ಬಿಳಿಯ ಸಸ್ಯಾಹಾರಿಗಳ ಜೊತೆ ಸೇರಿ, ಪುಸ್ತಕಗಳನ್ನು ಓದಿ, ಸಸ್ಯಾಹಾರವನ್ನು ಮನಃಪೂರ್ವಕವಾಗಿ ಜೀವನಪರ್ಯಂತ ಸ್ವೀಕರಿಸಿದರು. ಆದರೆ ಆ ವೈಚಾರಿಕ ಕಾರಣಗಳು ಮತ್ತು ಮಾಂಸಾಹಾರ ಮುಂದೆಂದೂ ಸೇವಿಸದಂತೆ ಗಾಂಧಿ ಮನಸ್ಸು ಬದಲಾಯಿಸಲು ಕಾರಣಗಳೇನಾಗಿದ್ದವು ಎನ್ನುವುದು ಮೊಮ್ಮಗನ ಪುಸ್ತಕದಲ್ಲಿ ದಾಖಲಾಗಿಲ್ಲ.

ಈಗ ಒಂದೆರಡು ವರ್ಷದಿಂದ ಗ್ಲೋಬಲ್ ವಾರ್ಮಿಂಗ್ ಮತ್ತು ಹವಾಮಾನ ವೈಪರೀತ್ಯಗಳ ಬಗ್ಗೆ ಓದಿ, ನೋಡಿ, ಕೇಳಿ, ನನಗೆ ನಿಜಕ್ಕೂ ಮನುಷ್ಯ ಅಥವ ಜೀವಸಂಕುಲದ ಉಳಿವಿನ ಬಗ್ಗೆಯೇ ಸಂದೇಹ ಬರುತ್ತಿದೆ. ಮನುಷ್ಯ ಪ್ರಕೃತಿಯನ್ನು ನಡೆಸಿಕೊಳ್ಳುತ್ತಿರುವ ರೀತಿ ಅದು ಮನುಷ್ಯನಿಗೆ ಕರುಣೆ ತೋರಿಸುವ ಯಾವೊಂದು ಅವಕಾಶಗಳನ್ನೂ ಉಳಿಸುತ್ತಿಲ್ಲ. ಇದರ ಬಗ್ಗೆ ಯೋಚಿಸಿದಾಗೆಲ್ಲ ನನಗೆ ಮನುಷ್ಯ ತನ್ನ ಆಹಾರಪದ್ಧತಿಯನ್ನು ಬದಲಾಯಿಸಿಕೊಳ್ಳಬೇಕು ಮತ್ತು ಮಾಂಸಾಹಾರದ ಮೇಲಿನ ಅವಲಂಬನೆ ಕಮ್ಮಿ ಮಾಡಿಕೊಳ್ಳಬೇಕು ಎನ್ನಿಸುತ್ತದೆ.

ಇದರ ಬಗ್ಗೆ ಒಂದು ಲೇಖನ ಬರೆಯಬೇಕು ಎಂದು ನನಗೆ ಆರೇಳು ತಿಂಗಳಿನಿಂದ ಅನ್ನಿಸುತ್ತಿತ್ತು. ಆಗಲಿಲ್ಲ. ಕನಿಷ್ಠ ಈಗಲಾದರೂ ನನ್ನ ಆಲೋಚನೆಗಳನ್ನು ದಾಖಲಿಸೋಣ, ಆಮೇಲೆ ವಿಸ್ತೃತವಾಗಿ, ಬೇರೆಬೇರೆ ಕೋನಗಳಿಂದ ಅವಲೋಕಿಸಿ ಬರೆಯೋಣ ಎಂದುಕೊಂಡು ಇಲ್ಲಿ ಸದ್ಯಕ್ಕೆ ಕೆಲವನ್ನು ನೋಟ್ ಮಾಡುತ್ತಿದ್ದೇನೆ.

ಬಾಲ್ಯದಲ್ಲಿ ಕೆಲವೊಂದು ಹಬ್ಬಕ್ಕೊ, ಇಲ್ಲಾ ತಿಂಗಳಿಗೊ, ಇಲ್ಲಾ ನೆಂಟರು ಬಂದಾಗಲೊ ಅಥವ ನೆಂಟರ ಮನೆಗೆ ಹೋದಾಗಲೊ ಅಷ್ಟೇ ಮಾಂಸ ತಿನ್ನುವ ಅವಕಾಶ ಸಿಗುತ್ತಿದ್ದದ್ದು. ಆದರೆ ಕಾಲೇಜಿನ ದಿನಗಳಲ್ಲಿ ವಾರಕ್ಕೊಮ್ಮೆಯಾದರೂ ತಿನ್ನುತ್ತಿದೆ. ಅಂತಹುದೇ ದಿನಗಳಲ್ಲಿ ನನ್ನಪ್ಪ ಅಂದ ಮಾತಿನಿಂದಾಗಿ ಆಗಾಗ ಕೋಳಿಸಾರು ತಿನ್ನಬೇಕು ಎನ್ನುವ ಚಪಲವನ್ನು ನನ್ನ ವೀಕ್‌ನೆಸ್‌ಗೆ ಸಮೀಕರಿಸಿಕೊಂಡು ಸುಮಾರು ಎರಡೂವರೆ ವರ್ಷಗಳ ಕಾಲ ಪಕ್ಕಾ ಸಸ್ಯಾಹಾರಿಯಾಗಿ ಕಳೆದಿದ್ದೆ. ಕೇಕ್ ಸಹ ತಿಂದಿರಲಿಲ್ಲ. ಎಂದೂ ಅದರ ಬಗ್ಗೆ ವಿಷಾದವಾಗಲಿಲ್ಲ. ಬದಲಿಗೆ ನನಗೆ ನನ್ನ ಇಚ್ಚಾಶಕ್ತಿಯ ಬಗ್ಗೆ ಹೆಮ್ಮೆ ಆಗುತ್ತಿತ್ತು. ಆದರೆ ಮತ್ತೊಂದು ಸಂದರ್ಭದಲ್ಲಿ ಆ ಚಪಲ ಇನ್ನು ವೀಕ್‌ನೆಸ್ ಆಗಿ ಉಳಿದಿಲ್ಲ ಅನ್ನಿಸಿದ ಮೇಲೆ, ಹಾಗು ನಾನೆ ದುಡಿದು ತಿನ್ನಲಾರಂಭಿಸಿದ ಮೇಲೆ ಮತ್ತೆ ಮಾಂಸಾಹಾರಿಯಾದೆ. ವಿಸ್ಕಾನ್ಸಿನ್‌ನಲ್ಲಿ ಇದ್ದ ಆರಂಭದ ಸಂದರ್ಭದಲ್ಲಿ ಕಾರಿಲ್ಲದ್ದರಿಂದ ಮತ್ತು ಗುಜರಾತಿಯೊಬ್ಬರ ಊರ ಹೊರಗಿನ ಮೋಟೆಲ್ ಒಂದರಲ್ಲಿ ಇದ್ದ ಕಾರಣದಿಂದಾಗಿ ಸುಮಾರು ಮೂರು ತಿಂಗಳ ಕಾಲ ಪಕ್ಕದ ಪೆಟ್ರೋಲ್ ಬಂಕಿನ ಡೆಲಿಯಲ್ಲಿ ಕೇವಲ ಕರಿದ ಚಿಕನ್ ಮತ್ತು ಇತರ ಮಾಂಸವನ್ನೆ ತಿಂದು ಕಾಲ ಹಾಕಿದ್ದೆ. ಈಗ ಮತ್ತೆ ನಾಲಿಗೆ ರುಚಿ ಬೇಡುತ್ತಿದೆ.

ಇನ್ನು ಊರಿನಲ್ಲಿ ಮಾಂಸ ತಿನ್ನಲಾರದೆ ಇರಲು ಕೆಲವು ಆಪ್ತ ಕಾರಣಗಳೂ ಇವೆ. ನಾನು ಪಕ್ಕಾ ಸಸ್ಯಾಹಾರಿಯಾದರೆ ಕೆಲವೊಂದು ಪ್ರೀತಿಯ ನೆಂಟರ ಮತ್ತು ಸ್ನೇಹಿತರ ಜೊತೆ ಕುಳಿತು ಊಟವನ್ನು ಎಂಜಾಯ್ ಮಾಡುವ ಅವಕಾಶವನ್ನೆ ಕಳೆದುಕೊಳ್ಳುತ್ತೇನೆ. ಕೆಲವೊಮ್ಮೆ ನನ್ನವರ ಪರಂಪರೆಯ ಮುಂದುವರಿಕೆಗಾದರೂ ಮಾಂಸಾಹಾರಿಯಾಗಿ ಮುಂದುವರೆಯಬೇಕು ಎನ್ನಿಸುತ್ತದೆ.

ಆದರೆ, ಮಾಂಸಾಹಾರಕ್ಕಾಗಿ ಮನುಷ್ಯ ಉಪಯೋಗಿಸುತ್ತಿರುವ ಶಕ್ತಿಮೂಲಗಳ ಮತ್ತು ಸಂಪನ್ಮೂಲಗಳ ಬಗ್ಗೆ ಯೋಚಿಸುತ್ತಿರುವ ಇತ್ತೀಚಿನ ದಿನಗಳಲ್ಲಿ ನಾನು ನನ್ನ ಕಡೆಯಿಂದ ನನ್ನ ಈಗಿನ ಆಹಾರ ಪದ್ದತಿಯನ್ನೆ ಬದಲಾಯಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎನ್ನಿಸುತ್ತದೆ. ಸುಮ್ಮನೆ ಕೆಲವೊಂದು ಪಾಯಿಂಟ್‌ಗಳನ್ನು ಇಲ್ಲಿ ಹೆಸರಿಸಿ ಇವತ್ತಿಗೆ ಇದನ್ನು ಮುಗಿಸುತ್ತೇನೆ. ಆದಾಗಲೆಲ್ಲ ಈ ಬ್ಲಾಗ್ ಪೋಸ್ಟನ್ನು ಅಪ್‌ಡೇಟ್ ಮಾಡಿಕೊಂಡರಾಯಿತು.

  • ಅದು ಇರುವ ಮನೆಗಳಲ್ಲಿ ೨೪ ಗಂಟೆಯೂ ವಿದ್ಯುತ್ ಬಳಸುವ ಉಪಕರಣ ಅಂದರೆ ರೆಫ್ರಿಜರೇಟರ್. ಅದರಲ್ಲಿ ಬಳಸುವ ರಾಸಾಯನಿಕಗಳಿಂದ ಪರಿಸರಕ್ಕೂ ಹಾನಿ. ಹಾಗಾಗಿ ಮನೆಗಳಲ್ಲಿ ರೆಫ್ರಿಜರೇಟರ್ ಇಟ್ಟುಕೊಳ್ಳುವುದನ್ನು discourage ಮಾಡಬೇಕು.
  • ಮನುಷ್ಯ ಆದಷ್ಟು ತನ್ನ ಸುತ್ತಮುತ್ತಲ ಪರಿಸರದಲ್ಲಿ ಬೆಳೆದದ್ದನ್ನೆ ತಿನ್ನಬೇಕು – ಸಸ್ಯಾಹಾರವಾಗಲಿ, ಮಾಂಸಾಹಾರವಾಗಲಿ.
  • ಆದಷ್ಟು ತಾಜಾ ತರಕಾರಿಗಳನ್ನು ಮತ್ತು ದೀರ್ಘಕಾಲ ರೂಮ್ ವಾತಾಂಶದಲ್ಲಿ ಶೇಖರಿಸಬಹುದಾದ ಧವಸ ಧಾನ್ಯಗಳನ್ನೆ ತಿನ್ನಬೇಕು
  • ಆಹಾರ ಪದಾರ್ಥಗಳ ರಫ್ತನ್ನು ನಿಷೇಧಿಸಬೇಕು. ಒಂದು ಸುತ್ತಳತೆಯ ಮಟ್ಟದಲ್ಲಿಯೇ ಧವಸಧಾನ್ಯಗಳ ವ್ಯಾಪಾರವಾಗಬೇಕು. ಎಲ್ಲಿ ಪ್ರತಿಕೂಲ ಹವಾಮಾನಗಳಿಂದಾಗಿ ಬೆಳೆ ಬೆಳೆಯಲು ಸಾಧ್ಯವಿಲ್ಲವೊ ಅಲ್ಲಿಗೆ ಮಾತ್ರ ರಫ್ತಿನ ಅವಕಾಶ ಇರಬೇಕು. ಬೇರೆ ಕಡೆಗಳಿಂದ ಬರುವ ಆಹಾರ ಸಾಮಗ್ರಿಗಳಿಗೆ ಜಾಸ್ತಿಯೆ ಎನ್ನಿಸುವಷ್ಟು ತೆರಿಗೆ ಹಾಕಬೇಕು. ಇದು ಆಹಾರ ಪದಾರ್ಥಗಳ ಸಾರಿಗೆ ಮತ್ತು ಅದರಿಂದ ಖರ್ಚಾಗುವ ತೈಲ ಮತ್ತು ಎಮಿಷನ್ ಅನ್ನು ತಡೆಯುತ್ತದಷ್ಟೆ ಅಲ್ಲದೆ ಎಲ್ಲಾ ದೇಶಗಳೂ ಆಹಾರದ ವಿಚಾರದಲ್ಲಿ ಸ್ವಾವಲಂಬಿಯಾಗುವಂತೆ ಮಾಡುತ್ತವೆ. ರೈತನಿಗೂ ತನ್ನ ಬೆಳೆಗೆ ಎಷ್ಟು ಮಾರುಕಟ್ಟೆ ಇರುತ್ತದೆ ಎನ್ನುವ ಒಂದು ಪಕ್ಕಾ ತಿಳಿವೂ ಆಗ ಇರುತ್ತದೆ.
  • ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗುವ ಜನರು ಅಲ್ಲಿಯ ಸ್ಥಳೀಯ ಆಹಾರವನ್ನು ತೆಗೆದುಕೊಳ್ಳುವ ಮನೋಭಾವ ಮತ್ತು ಅದೇ ನೈತಿಕವಾದದ್ದು ಎನ್ನುವ ನಂಬಿಕೆ ಬೆಳೆಸಬೇಕು.
  • ಮಾಂಸಾಹಾರಕ್ಕಾಗಿ ಉದ್ದಿಮೆಯ ಮಟ್ಟದಲ್ಲಿ ಪ್ರಾಣಿಗಳನ್ನು ಸಾಕುವುದು ನಿಲ್ಲಬೇಕು.
  • ಮಾಂಸವನ್ನು ತಾಜಾ ಆಗಿಯೆ ಶೇಖರಿಸಿಡಲು ರೇಫ್ರಿಜರೇಟರ್‌ನ ಅವಶ್ಯಕತೆ ಇರುವುದರಿಂದ ಅಂತಹ ಆಹಾರಸೇವನೆಯನ್ನು ತ್ಯಜಿಸಬೇಕು, ಇಲ್ಲವೆ ವಿಶೇಷ ಸಂದರ್ಭಕ್ಕೆ ಮಾತ್ರ ಇಟ್ಟುಕೊಳ್ಳಬೇಕು. ಆಗಾಲೂ ಅಂಗಡಿಗೆ ಹೋಗಿ ಅಂದು ಕಡಿದ ಮಾಂಸವನ್ನೆ ತರಬೇಕು.
  • ಸಮುದ್ರದಲ್ಲಿ ಮಾಡಿದ ಮೀನುಗಾರಿಕೆಯೂ ಕರಾವಳಿಯಲ್ಲಿಯೇ ಮಾರುವಂತಿರಬೇಕು. ಅದರ ರಪ್ತನ್ನೂ, ಐಸ್‌ನಲ್ಲಿ ಹಾಕಿ ಒಳಊರುಗಳಿಗೆ ಸಾಗಿಸುವುದನ್ನೂ ನಿಲ್ಲಿಸಬೇಕು. ಇವೆಲ್ಲವನ್ನೂ ಒಂದು ಉದ್ದಿಮೆಯಾಗಿ ಪ್ರೋತ್ಸಾಹಿಸಬಾರದು.
  • …(ಬೆಳೆಯುತ್ತದೆ)

ಗಾಂಧಿ ಯಾಕೆ ಸಸ್ಯಾಹಾರದ ಪರ ಇದ್ದರು ಎನ್ನುವುದಾಗಲಿ, ಅಥವ ಮಾಂಸಾಹಾರಿಗಳು ಹಾಗೆಹೀಗೆ ಎನ್ನುವ ವಾದಗಳಾಗಲಿ ನನಗೆ ಅನಗತ್ಯ. ಆದರೆ ಈ ಪರಿ ಜನಸಂಖ್ಯೆ ಇರುವ ಇವತ್ತಿನ ಸಂದರ್ಭಕ್ಕೆ ಪ್ರತಿಯೊಬ್ಬ ಮನುಷ್ಯನು ತನ್ನ ಜೀವನಪದ್ಧತಿಯಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳದಿದ್ದರೆ, ಅವನು ಪ್ರಕೃತಿಗೆ ಮಾಡುತ್ತಿರುವ ಅಪಚಾರ ಇಡೀ ಜೀವಸಂಕುಲಕ್ಕೆ ನೋವಿನ ದಿನಗಳನ್ನು ತರಲಿದೆ ಎಂದು ನನಗೆ ಅನ್ನಿಸುತ್ತಿರುವುದರಿಂದ, ಅದಕ್ಕೆ ನಾನೇನು ಮಾಡಬೇಕು ಎಂದು ಪ್ರಶ್ನೆ ಹಾಕಿಕೊಂಡಿರುವುದರಿಂದ, ಬರಲಿರುವ ದಿನಗಳಲ್ಲಿ ನನ್ನ ಜೀವನಪದ್ಧತಿ ಮತ್ತು ಆಹಾರ ಪದ್ಧತಿಗಳೂ ಬದಲಾಗಲಿವೆ. ಇಲ್ಲದಿದ್ದರೆ, I will be feeling sorry all the time. ನಾನು ಮತ್ತೊಮ್ಮೆ ಸಸ್ಯಾಹಾರಿಯಾಗಬೇಕಿದೆ ಮತ್ತು ಸ್ಥಳೀಯವಾದದ್ದನ್ನೆ ತಿನ್ನುವ ಅಥವ ಬೆಳೆದುಕೊಳ್ಳುವ ಬಗ್ಗೆ ಯೋಚಿಸಬೇಕಿದೆ.

ಇದರ ಜೊತೆಗೆ, ಇದನ್ನು ಯಾಕೆ ಮತ್ತು ಹೇಗೆ ಸಮುದಾಯಕ್ಕೆ ತೆಗೆದುಕೊಂಡು ಹೋಗಬೇಕು ಮತ್ತು ಈಗಾಗಲೆ ತೆಗೆದುಕೊಂಡು ಹೋಗಿರುವವರು ಬಳಸುತ್ತಿರುವ ಮಾರ್ಗಗಳು ಏನು, ಅವುಗಳ ಪರಿಣಾಮ ಏನು ಎನ್ನುವುದು ನನ್ನ ಮುಂದಿನ ದಿನಗಳ ಒಂದು ಪಾಲು ಸಮಯವನ್ನು ತೆಗೆದುಕೊಳ್ಳುತ್ತದೆ.

ಇದನ್ನು ಓದುವ ಓದುಗರು, ತಮ್ಮ ತಿಳುವಳಿಕೆ, ಅಭಿಪ್ರಾಯ, ಪರವಿರೋಧಗಳನ್ನು ಇಲ್ಲಿ ಹಂಚಿಕೊಳ್ಳಬಹುದು. ಎಲ್ಲವನ್ನೂ ಓದುತ್ತೇನೆ. ಅಗತ್ಯವಾದಲ್ಲಿ ನನ್ನ ಪ್ರತಿಕ್ರಿಯೆ ಬರೆಯುತ್ತೇನೆ.

Reader Comments

Verry good information,

Regards
N JDevaraja reddy
Geo Rain water board
chitradurga
94481-25498 m

#1 
Written By DEVARAJAREDDY N J on January 9th, 2009 @ 9:24 pm

Add a Comment

required, use real name
required, will not be published
optional, your blog address